ಪೆರ್ಮುದೆ ಘಟನೆ ವಿವರ
ಕಾಸರಗೋಡು, ಮೇ 28: ಪೆರ್ಮುದೆ ಸಮೀಪದ ಪೆರಿಯಡ್ಕದಲ್ಲಿ ಸ್ಕೂಟರ್ ಮತ್ತು ಬೈಕ್ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಯುವಕನೊಬ್ಬ ಮೃತಪಟ್ಟಿದ್ದು, ತಂದೆ ಗಂಭೀರವಾಗಿ ಗಾಯಗೊಂಡ ಘಟನೆ ಗುರುವಾರ ಬೆಳಿಗ್ಗೆ ನಡೆದಿದೆ.
ಅಪಘಾತದಲ್ಲಿ ಮೃತಪಟ್ಟ ಯುವಕನನ್ನು ಬಾಯಾರು ನೆತ್ತರಗುಳಿ ನಿವಾಸಿ ಎನ್. ಕಿಶನ್ (24) ಎಂದು ಗುರುತಿಸಲಾಗಿದೆ. ಸ್ಕೂಟರ್ನ ಹಿಂದೆ ಕುಳಿತಿದ್ದ ಕಿಶನ್ ಅವರ ತಂದೆ ಮಾಧವ ದೇವಾಡಿಗ ಅಪಘಾತದ ತೀವ್ರತೆಗೆ ಗಂಭೀರ ಗಾಯಗೊಂಡಿದ್ದಾರೆ.
ದೊರೆತ ಮಾಹಿತಿಯಂತೆ, ಎದುರು ದಿಕ್ಕಿನಿಂದ ವೇಗವಾಗಿ ಬರುತ್ತಿದ್ದ ಬೈಕ್ ಸ್ಕೂಟರ್ಗೆ ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ ಅಪಘಾತ ಸಂಭವಿಸಿದೆ. ಅಪಘಾತದ ತೀವ್ರತೆಗೆ ಕಿಶನ್ ಸ್ಥಳದಲ್ಲೇ ಗಂಭೀರವಾಗಿ ಗಾಯಗೊಂಡಿದ್ದು, ಬಳಿಕ ಅವರು ಮೃತಪಟ್ಟಿದ್ದಾರೆ ಎನ್ನಲಾಗಿದೆ.
ಗಂಭೀರವಾಗಿ ಗಾಯಗೊಂಡ ಮಾಧವ ದೇವಾಡಿಗರನ್ನು ತಕ್ಷಣವೇ ಮಂಗಳೂರಿನ ಆಸ್ಪತ್ರೆಗೆ ಸಾಗಿಸಿ ಹೆಚ್ಚಿನ ಚಿಕಿತ್ಸೆಗೆ ದಾಖಲಿಸಲಾಗಿದೆ.
ಘಟನೆಯ ಕುರಿತು ಸ್ಥಳೀಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.









