ಕೊಡಗು ಜಿಲ್ಲೆಯಲ್ಲಿ ಮುಂಗಾರು ಮಳೆ ತೀವ್ರಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ಸಾರ್ವಜನಿಕರ ಸುರಕ್ಷತೆ ಹಾಗೂ ಸಾರ್ವಜನಿಕ ಆಸ್ತಿಪಾಸ್ತಿಗಳ ರಕ್ಷಣೆಯನ್ನು ಗಮನದಲ್ಲಿಟ್ಟುಕೊಂಡು ಭಾರಿ ಸರಕು ಸಾಗಣೆ ವಾಹನಗಳ ಸಂಚಾರದ ಮೇಲೆ ಜಿಲ್ಲಾಡಳಿತ ತಾತ್ಕಾಲಿಕ ನಿರ್ಬಂಧ ವಿಧಿಸಿದೆ. ಈ ಆದೇಶವು ಇಂದಿನಿಂದ ಜುಲೈ 9ರವರೆಗೆ ಜಾರಿಯಲ್ಲಿರಲಿದೆ.
ಮಳೆಗಾಲದಲ್ಲಿ ಜಿಲ್ಲೆಯ ರಸ್ತೆಗಳಲ್ಲಿ ಮಣ್ಣು ಕುಸಿತ ಹಾಗೂ ರಸ್ತೆ ಹಾನಿಯ ಸಾಧ್ಯತೆ ಹೆಚ್ಚಾಗುತ್ತದೆ. ವಿಶೇಷವಾಗಿ ಅಧಿಕ ಭಾರ ಹೊತ್ತ ವಾಹನಗಳ ನಿರಂತರ ಸಂಚಾರದಿಂದ ರಸ್ತೆ ಬದಿಗಳಲ್ಲಿ ಕುಸಿತ ಉಂಟಾಗಿ ಸಂಚಾರಕ್ಕೆ ಅಡಚಣೆ ಹಾಗೂ ಅಪಘಾತಗಳ ಸಂಭವ ಹೆಚ್ಚುತ್ತಿರುವುದನ್ನು ಪರಿಗಣಿಸಿ ಈ ಕ್ರಮ ಕೈಗೊಳ್ಳಲಾಗಿದೆ.
ಜಿಲ್ಲಾದ್ಯಂತ ಮರಳು ಸಾಗಣೆ ವಾಹನಗಳು, ಮರದ ದಿಮ್ಮಿಗಳ ಸಾಗಾಣಿಕೆ ವಾಹನಗಳು ಹಾಗೂ ನೋಂದಾಯಿತ ತೂಕ 18,500 ಕೆ.ಜಿಗಿಂತ ಹೆಚ್ಚಿನ ಸರಕು ಸಾಗಣೆ ವಾಹನಗಳ ಸಂಚಾರವನ್ನು ನಿಷೇಧಿಸಲಾಗಿದೆ. ಇದರ ಜೊತೆಗೆ ಬುಲೆಟ್ ಟ್ಯಾಂಕರ್ಗಳು, ಶಿಪ್ ಕಾರ್ಗೋ ಕಂಟೈನರ್ಗಳು, ಲಾಂಗ್ ಚಾಸಿಸ್ (ಮಲ್ಟಿ ಆಕ್ಸಿಲ್) ವಾಹನಗಳು ಮತ್ತು ಆರ್ಟಿಕ್ಯೂಲೇಟೆಡ್ ವಾಹನಗಳ ಸಂಚಾರಕ್ಕೂ ನಿರ್ಬಂಧ ಅನ್ವಯವಾಗಲಿದೆ.
ಈ ಆದೇಶವನ್ನು ವಿಪತ್ತು ನಿರ್ವಹಣಾ ಕಾಯ್ದೆ, ಮೋಟಾರು ವಾಹನಗಳ ಕಾಯ್ದೆ, ಕರ್ನಾಟಕ ಮೋಟಾರು ವಾಹನಗಳ ನಿಯಮಗಳು ಹಾಗೂ ಭಾರತೀಯ ನಾಗರಿಕ ಸುರಕ್ಷಾ ಸಂಹಿತೆಯ ಅಡಿಯಲ್ಲಿ ಜಾರಿಗೊಳಿಸಲಾಗಿದೆ.
ಅಡುಗೆ ಅನಿಲ ಹಾಗೂ ಇಂಧನ ಪೂರೈಕೆ ವಾಹನಗಳು, ಹಾಲು ವಿತರಣೆ ವಾಹನಗಳು, ಸರ್ಕಾರಿ ಕಾರ್ಯಗಳಿಗೆ ಬಳಸುವ ವಾಹನಗಳು, ಶಾಲಾ-ಕಾಲೇಜು ವಾಹನಗಳು ಮತ್ತು ಸಾರ್ವಜನಿಕ ಪ್ರಯಾಣಿಕರ ವಾಹನಗಳಿಗೆ ಈ ನಿರ್ಬಂಧದಿಂದ ವಿನಾಯಿತಿ ನೀಡಲಾಗಿದೆ.
ಇದೇ ವೇಳೆ, ಕೊಡಗು ಜಿಲ್ಲಾ ಪೊಲೀಸ್ ಅಧೀಕ್ಷಕರಿಗೆ ಅಗತ್ಯ ಸೂಚನಾ ಫಲಕಗಳನ್ನು ಅಳವಡಿಸುವಂತೆ ಸೂಚಿಸಲಾಗಿದೆ.
ಜಿಲ್ಲಾದಂಡಾಧಿಕಾರಿ ಹಾಗೂ ಪ್ರಾದೇಶಿಕ ಸಾರಿಗೆ ಪ್ರಾಧಿಕಾರದ ಅಧ್ಯಕ್ಷರಾದ ಎಸ್.ಜೆ. ಸೋಮಶೇಖರ್ ಅವರು ಆದೇಶ ಹೊರಡಿಸಿದ್ದು, ಜಿಲ್ಲೆಯ ಮೂಲಕ ಹಾದುಹೋಗುವ ರಾಷ್ಟ್ರೀಯ ಹೆದ್ದಾರಿ-275ರ ಕುಶಾಲನಗರ ಮತ್ತು ಸಂಪಾಜೆ ಗಡಿಭಾಗಗಳಲ್ಲಿ ಚೆಕ್ಪೋಸ್ಟ್ಗಳನ್ನು ಸ್ಥಾಪಿಸಿ 24 ಗಂಟೆಗಳ ನಿಗಾ ವಹಿಸಲು ಸಿಬ್ಬಂದಿಯನ್ನು ನಿಯೋಜಿಸಲಾಗಿದೆ ಎಂದು ತಿಳಿಸಲಾಗಿದೆ.











2 thoughts on “ಕೊಡಗಿನಲ್ಲಿ ಭಾರಿ ವಾಹನಗಳಿಗೆ ತಾತ್ಕಾಲಿಕ ನಿರ್ಬಂಧ : ಜುಲೈ 9ರವರೆಗೆ ಜಿಲ್ಲಾಡಳಿತ ಆದೇಶ”