ಮಂಗಳೂರು : ಸುರತ್ಕಲ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದ ಅಪ್ರಾಪ್ತ ಬಾಲಕಿ ಆತ್ಮಹತ್ಯೆ ಪ್ರಕರಣದ ತನಿಖೆ ವೇಳೆ ಹಲವು ಮಹತ್ವದ ಸಂಗತಿಗಳು ಬೆಳಕಿಗೆ ಬಂದಿವೆ ಎಂದು ನಗರ ಪೊಲೀಸ್ ಕಮಿಷನರ್ ಸುಧೀರ್ ಕುಮಾರ್ ರೆಡ್ಡಿ ತಿಳಿಸಿದ್ದಾರೆ. ಬಾಲಕಿಯ ಜೀವನದಲ್ಲಿ ನಡೆದ ಕೆಲ ಬೆಳವಣಿಗೆಗಳ ಬಗ್ಗೆ ಕುಟುಂಬಕ್ಕೆ ಮಾಹಿತಿ ಇದ್ದರೂ, ಸಮಯಕ್ಕೆ ಅಗತ್ಯ ಕ್ರಮ ಕೈಗೊಳ್ಳದಿರುವುದು ಪ್ರಕರಣ ಗಂಭೀರ ಸ್ವರೂಪ ಪಡೆಯಲು ಕಾರಣವಾಗಿರಬಹುದು ಎಂದು ಅವರು ಹೇಳಿದ್ದಾರೆ.
ನಗರದಲ್ಲಿ ಗುರುವಾರ ನಡೆದ ಮಾದಕ ದ್ರವ್ಯ ವಿರೋಧಿ ದಿನಾಚರಣೆಯ ಕಾರ್ಯಕ್ರಮದಲ್ಲಿ ಮಾತನಾಡಿದ ಕಮಿಷನರ್, ಮೃತ ಬಾಲಕಿ ಸಂಗೀತ ತಂಡವೊಂದರ ಸದಸ್ಯೆಯಾಗಿದ್ದಳು ಎಂದು ತಿಳಿಸಿದರು. ಆ ತಂಡದ ಕೆಲವು ಸದಸ್ಯರ ವಿರುದ್ಧ ಈ ಹಿಂದೆಯೇ ಮಾದಕ ವಸ್ತುಗಳ ಸಂಬಂಧ ಪ್ರಕರಣಗಳು ದಾಖಲಾಗಿದ್ದವು ಎಂಬ ಮಾಹಿತಿಯನ್ನೂ ಅವರು ನೀಡಿದರು.
ತನಿಖೆಯ ಪ್ರಕಾರ, ತಂಡದ ಸದಸ್ಯನೊಬ್ಬ ಬಾಲಕಿಗೆ ದೈಹಿಕ ಕಿರುಕುಳ ನೀಡಿದ್ದಾನೆ ಎನ್ನುವ ಶಂಕೆ ವ್ಯಕ್ತವಾಗಿದ್ದು, ಅದರ ಪರಿಣಾಮ ಆಕೆ ಗರ್ಭಿಣಿಯಾಗಿದ್ದಳು ಎಂದು ಕಮಿಷನರ್ ತಿಳಿಸಿದ್ದಾರೆ. ಬಳಿಕ ಆಕೆ ಆತ್ಮಹತ್ಯೆಗೆ ಶರಣಾಗಿರುವುದಾಗಿ ಅವರು ಹೇಳಿದರು.
ಪ್ರಕರಣ ಕುರಿತು ಮಾತನಾಡಿದ ಅವರು, ಬಾಲಕಿ ರಾತ್ರಿ ತಡವಾಗಿ ಮನೆಗೆ ಬರುತ್ತಿದ್ದ ಸಂದರ್ಭಗಳಲ್ಲಿ ಪೋಷಕರು ಹೆಚ್ಚಿನ ಗಮನ ಹರಿಸಿ ವಿಚಾರಿಸಬೇಕಾಗಿತ್ತು ಎಂದು ಅಭಿಪ್ರಾಯಪಟ್ಟರು. ಕಳೆದ ಸುಮಾರು ಒಂದು ವರ್ಷದಿಂದ ಈ ಬೆಳವಣಿಗೆಗಳ ಕುರಿತು ಯಾವುದೇ ದೂರು ಅಥವಾ ಮಾಹಿತಿ ನೀಡದಿದ್ದ ಕುಟುಂಬ, ಈಗ ಆರೋಪಿಯನ್ನು ಬಂಧಿಸುವಂತೆ ಆಗ್ರಹಿಸುತ್ತಿದೆ ಎಂದರು.
ಈ ಪ್ರಕರಣದಲ್ಲಿ ತಪ್ಪಿತಸ್ಥನನ್ನು ಪತ್ತೆಹಚ್ಚಿ ಕಾನೂನು ಕ್ರಮ ಕೈಗೊಳ್ಳಲು ಪೊಲೀಸ್ ಇಲಾಖೆ ಅಗತ್ಯ ತನಿಖೆಯನ್ನು ಮುಂದುವರಿಸಿದ್ದು, ಆರೋಪಿಯನ್ನು ಶೀಘ್ರವೇ ಬಂಧಿಸಲಾಗುವುದು ಎಂಬ ವಿಶ್ವಾಸವನ್ನೂ ಕಮಿಷನರ್ ಸುಧೀರ್ ಕುಮಾರ್ ರೆಡ್ಡಿ ವ್ಯಕ್ತಪಡಿಸಿದರು.
ಮತ್ತಷ್ಟು ಓದಿ :










