ಬನ್ನೂರು, ಜೂನ್ 6 : ಕರ್ನಾಟಕ ರಾಜ್ಯ ಅರಣ್ಯ ಇಲಾಖೆಯ ವತಿಯಿಂದ ಬನ್ನೂರಿನ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಇಂದು ಬೆಳಿಗ್ಗೆ ವನಮಹೋತ್ಸವ ಹಾಗೂ ವಿಶ್ವ ಪರಿಸರ ದಿನಾಚರಣೆ ಕಾರ್ಯಕ್ರಮ ಅರ್ಥಪೂರ್ಣವಾಗಿ ಮತ್ತು ಯಶಸ್ವಿಯಾಗಿ ನಡೆಯಿತು. ಪರಿಸರ ಸಂರಕ್ಷಣೆ, ಅರಣ್ಯ ಸಂಪತ್ತಿನ ಮಹತ್ವ ಹಾಗೂ ಹಸಿರು ಭವಿಷ್ಯದ ಕುರಿತು ಜಾಗೃತಿ ಮೂಡಿಸುವ ಉದ್ದೇಶದಿಂದ ಆಯೋಜಿಸಲಾದ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳು, ಶಿಕ್ಷಕರು, ಅರಣ್ಯ ಇಲಾಖೆ ಅಧಿಕಾರಿಗಳು ಹಾಗೂ ಸಾರ್ವಜನಿಕರು ಉತ್ಸಾಹದಿಂದ ಭಾಗವಹಿಸಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಎಸ್.ಡಿ.ಎಂ.ಸಿ. ಕಾರ್ಯಾಧ್ಯಕ್ಷರಾದ ಶ್ರೀ ಗುರುಪ್ರಸಾದ್ ಆಚಾರ್ಯ ಪಿ. ವಹಿಸಿದ್ದರು. ಪುತ್ತೂರು ವಿಧಾನಸಭಾ ಕ್ಷೇತ್ರದ ಶಾಸಕರಾದ ಮಾನ್ಯ ಅಶೋಕ್ ಕುಮಾರ್ ರೈ ಅವರು ಕಾರ್ಯಕ್ರಮವನ್ನು ಗಿಡ ನೆಡುವ ಮೂಲಕ ಉದ್ಘಾಟಿಸಿದ್ದಾರೆ . ಹಾಗೆ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ಅವರು ವನಮಹೋತ್ಸವದ ವಿಚಾರಗಳನ್ನು ತಿಳಿಸಿದರು ಹಾಗೂ ಸರಕಾರಿ ಇಲಾಖೆಗಳಲ್ಲಿ ಸಿಗುವ ಸವಲತ್ತುಗಳ ಬಗ್ಗೆ ತಿಳಿಸಿ ಅದರ ಸದುಪಯೋಗ ಪಡೆದುಕೊಳ್ಳುವಂತೆ ಕೋರಿದರು.

ಮುಖ್ಯ ಅತಿಥಿಗಳಾಗಿ ಶ್ರೀ ರವಿಶಂಕರ್ ಅರಣ್ಯ ಸಂರಕ್ಷಣಾಧಿಕಾರಿ ಮಂಗಳೂರು ವಿಭಾಗ, ಸ್ಟೆಲ್ಲಾ ವರ್ಗೀಸ್ ಸಹಾಯಕ ಆಯುಕ್ತರು ಪುತ್ತೂರು ಉಪ ವಿಭಾಗ, ಶ್ರೀ ಸುಬ್ಬಯ್ಯ ನಾಯ್ಕ್ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಪುತ್ತೂರು ಉಪ ವಿಭಾಗ, ಶ್ರೀ ಬಿ.ಮ್.ಕಿರಣ್ ವಲಯ ಅರಣ್ಯ ಅಧಿಕಾರಿ ಪುತ್ತೂರು ,ಶ್ರೀ ನವೀನ್ ಭಂಡಾರಿ ಕಾರ್ಯ ನಿರ್ವಹಣಾಧಿಕಾರಿ ಪುತ್ತೂರು, ಶ್ರೀ ಮೋನಪ್ಪ ಪೂಜಾರಿ ಕ್ಷೇತ್ರ ಶಿಕ್ಷಣಾಧಿಕಾರಿ ಪುತ್ತೂರು, ಹಾಗೂ ಮಹಮ್ಮದ್ ಅಶ್ರಫ್ ಮುಖ್ಯ ಶಿಕ್ಷಕರು ಸರಕಾರಿ ಪ್ರೌಢಶಾಲೆ ಬನ್ನೂರು ಉಪಸ್ಥಿತರಿದ್ದರು.
ಈ ಸಂದರ್ಭದಲ್ಲಿ ಮಾತನಾಡಿದ ಗಣ್ಯರು ಪರಿಸರ ಸಂರಕ್ಷಣೆಗಾಗಿ ಪ್ರತಿಯೊಬ್ಬ ನಾಗರಿಕನ ಸಹಭಾಗಿತ್ವ ಅಗತ್ಯವಾಗಿದೆ ಎಂದು ಅಭಿಪ್ರಾಯಪಟ್ಟರು. ಹವಾಮಾನ ಬದಲಾವಣೆ, ಅರಣ್ಯ ನಾಶ ಮತ್ತು ಪರಿಸರ ಮಾಲಿನ್ಯದಂತಹ ಸವಾಲುಗಳನ್ನು ಎದುರಿಸಲು ಮರಗಳ ಬೆಳವಣಿಗೆ ಹಾಗೂ ಸಂರಕ್ಷಣೆ ಅತ್ಯಗತ್ಯ ಎಂದು ಅವರು ತಿಳಿಸಿದರು.


ಕಾರ್ಯಕ್ರಮದ ಪ್ರಮುಖ ಆಕರ್ಷಣೆಯಾಗಿ ಶಾಲಾ ಆವರಣದಲ್ಲಿ ವಿವಿಧ ಜಾತಿಯ ಸಸಿಗಳನ್ನು ನೆಡುವ ಕಾರ್ಯ ನಡೆಯಿತು. ವಿದ್ಯಾರ್ಥಿಗಳು ಮತ್ತು ಅತಿಥಿಗಳು ಸಸಿ ನೆಡುವ ಮೂಲಕ ಪರಿಸರ ಸಂರಕ್ಷಣೆಯ ಸಂಕಲ್ಪ ಕೈಗೊಂಡರು. ಕಾರ್ಯಕ್ರಮವು ವಿದ್ಯಾರ್ಥಿಗಳಲ್ಲಿ ಪರಿಸರದ ಬಗ್ಗೆ ಜವಾಬ್ದಾರಿ ಮತ್ತು ಪ್ರಕೃತಿ ಪ್ರೇಮವನ್ನು ಬೆಳೆಸುವಲ್ಲಿ ಮಹತ್ವದ ಪಾತ್ರ ವಹಿಸಿತು.
ಹಸಿರು ಪರಿಸರ ನಿರ್ಮಾಣದ ಸಂದೇಶವನ್ನು ಸಾರಿದ ಈ ವನಮಹೋತ್ಸವ ಮತ್ತು ಪರಿಸರ ದಿನಾಚರಣೆ ಕಾರ್ಯಕ್ರಮ ಸ್ಥಳೀಯರಿಂದ ಉತ್ತಮ ಪ್ರಶಂಸೆಗೆ ಪಾತ್ರವಾಯಿತು.
ಮತ್ತಷ್ಟು ಓದಿ :
ಅಪ್ರಾಪ್ತ ವಿದ್ಯಾರ್ಥಿನಿ ಮೇಲೆ ಲೈಂಗಿಕ ದೌರ್ಜನ್ಯ ಆರೋಪ: ಯುವಕನ ವಿರುದ್ಧ ಪ್ರಕರಣ ದಾಖಲು
















1 thought on “ಬನ್ನೂರಿನಲ್ಲಿ ವನಮಹೋತ್ಸವ ಮತ್ತು ಪರಿಸರ ದಿನಾಚರಣೆ ಯಶಸ್ವಿ: ಸಸಿ ನೆಡುವ ಮೂಲಕ ಪರಿಸರ ಸಂರಕ್ಷಣೆಯ ಸಂಕಲ್ಪ”