ಬ್ರಹ್ಮಾವರ: ಸರ್ಕಾರದ ಉಚಿತ ಅನ್ನಭಾಗ್ಯ ಯೋಜನೆ ಅಡಿಯಲ್ಲಿ ವಿತರಿಸಬೇಕಿದ್ದ ಅಕ್ಕಿಯನ್ನು ಅಕ್ರಮವಾಗಿ ಕೇರಳಕ್ಕೆ ಸಾಗಿಸಲಾಗುತ್ತಿದ್ದ ಪ್ರಕರಣವನ್ನು ಆಹಾರ ಇಲಾಖೆ ಅಧಿಕಾರಿಗಳು ಹಾಗೂ ಕೋಟ ಪೊಲೀಸರು ಜಂಟಿ ಕಾರ್ಯಾಚರಣೆಯಲ್ಲಿ ಪತ್ತೆಹಚ್ಚಿದ್ದಾರೆ. ಕಾರ್ಯಾಚರಣೆಯಲ್ಲಿ ಲಕ್ಷಾಂತರ ರೂಪಾಯಿ ಮೌಲ್ಯದ ಅಕ್ಕಿ ಹಾಗೂ ಲಾರಿಯನ್ನು ಜಪ್ತಿ ಮಾಡಲಾಗಿದೆ.
160 ಕ್ವಿಂಟಲ್ ಅನ್ನಭಾಗ್ಯ ಅಕ್ಕಿ ವಶಕ್ಕೆ
ಆಹಾರ ಇಲಾಖೆಯ ಅಧಿಕಾರಿಗಳಿಗೆ ದೊರೆತ ಖಚಿತ ಮಾಹಿತಿಯ ಮೇರೆಗೆ ಬ್ರಹ್ಮಾವರ ಆಹಾರ ನಿರೀಕ್ಷಕ ವಸಂತ್ ಕುಮಾರ್ ನೇತೃತ್ವದಲ್ಲಿ, ಕೋಟ ಪೊಲೀಸ್ ಠಾಣೆಯ ಉಪನಿರೀಕ್ಷಕ ಪ್ರವೀಣ್ ಕುಮಾರ್ ಹಾಗೂ ಸಿಬ್ಬಂದಿ ಮಣೂರು ಗ್ರಾಮದ ಮಹಾಲಕ್ಷ್ಮಿ ಹೋಟೆಲ್ ಎದುರು ದಾಳಿ ನಡೆಸಿದರು.
ಈ ವೇಳೆ ಲಾರಿಯನ್ನು ತಡೆದು ಪರಿಶೀಲಿಸಿದಾಗ 320 ಪ್ಲಾಸ್ಟಿಕ್ ಚೀಲಗಳಲ್ಲಿ ಸಂಗ್ರಹಿಸಲಾಗಿದ್ದ 160 ಕ್ವಿಂಟಲ್ ಅನ್ನಭಾಗ್ಯ ಅಕ್ಕಿ ಪತ್ತೆಯಾಗಿದೆ. ಜಪ್ತಿಯಾದ ಅಕ್ಕಿಯ ಮೌಲ್ಯ ಸುಮಾರು ₹3.84 ಲಕ್ಷ ಎಂದು ಅಂದಾಜಿಸಲಾಗಿದೆ.
ಕೇರಳಕ್ಕೆ ಅಕ್ರಮ ಸಾಗಾಟದ ಆರೋಪ; ಪ್ರಕರಣ ದಾಖಲು
ಪ್ರಾಥಮಿಕ ತನಿಖೆಯ ಪ್ರಕಾರ, ಕುಮಟಾದ ನಾಡಾ ಮಸ್ಕೇರಿಯ ಶ್ರೀ ಗಣೇಶ್ ರೈಸ್ ಇಂಡಸ್ಟ್ರೀಸ್ ಮಾಲೀಕ ನಾಗರಾಜ ನಾಯ್ಕ್ ಅಕ್ಕಿಯನ್ನು ಲಾರಿಗೆ ತುಂಬಿಸಿದ್ದು, ಲಾರಿ ಮಾಲೀಕ ಗಿರೀಶ್ ನಾಯ್ಕ್ ಅವರ ಸೂಚನೆಯಂತೆ ಚಾಲಕ ಕೆ. ನರಸಿಂಹ ಕೇರಳದ ಕಾಸರಗೋಡಿನ ಶಾಜಿ ಟ್ರೇಡಿಂಗ್ ಕಂಪನಿಗೆ ಅಕ್ರಮವಾಗಿ ಸಾಗಿಸುತ್ತಿದ್ದರು ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಅಕ್ಕಿಯ ಜೊತೆಗೆ ಸುಮಾರು ₹3.50 ಲಕ್ಷ ಮೌಲ್ಯದ ಲಾರಿಯನ್ನೂ ವಶಪಡಿಸಿಕೊಳ್ಳಲಾಗಿದೆ. ಜಪ್ತಿಯಾದ ಅಕ್ಕಿ ಹಾಗೂ ಲಾರಿಯ ಒಟ್ಟು ಮೌಲ್ಯ ₹7.34 ಲಕ್ಷ ಎಂದು ಅಂದಾಜಿಸಲಾಗಿದೆ.
ಈ ಸಂಬಂಧ ಕೋಟ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಅಕ್ರಮ ಸಾಗಾಟದ ಜಾಲದ ಬಗ್ಗೆ ಪೊಲೀಸರು ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ.
ಮತ್ತಷ್ಟು ಓದಿ :
ಕೇರಳದಲ್ಲಿ ನವಜಾತ ಶಿಶುಗಳ ಮಾರಾಟ ಜಾಲ ಬಯಲು? ಇಬ್ಬರ ಬಂಧನ – ಅಂತರರಾಜ್ಯ ಮಕ್ಕಳ ಕಳ್ಳಸಾಗಣೆ ಶಂಕೆ











1 thought on “ಬ್ರಹ್ಮಾವರದಲ್ಲಿ ಅಕ್ರಮ ಅನ್ನಭಾಗ್ಯ ಅಕ್ಕಿ ಸಾಗಾಟ ಪತ್ತೆ: ₹7.34 ಲಕ್ಷ ಮೌಲ್ಯದ ಅಕ್ಕಿ ಹಾಗೂ ಲಾರಿ ಜಪ್ತಿ”