ಮಂಗಳೂರು/ಉಡುಪಿ: ಕರಾವಳಿಯಲ್ಲಿ ಒಂದೆರಡು ದಿನಗಳ ವಿರಾಮದ ಬಳಿಕ ಮುಂಗಾರು ಮತ್ತೆ ಚುರುಕುಗೊಳ್ಳಲಿದ್ದು, ಜುಲೈ 29ರಿಂದ 31ರವರೆಗೆ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ (IMD) ಮುನ್ಸೂಚನೆ ನೀಡಿದೆ. ಈ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳಿಗೆ ಬುಧವಾರ (ಜುಲೈ 29) ಆರೆಂಜ್ ಅಲರ್ಟ್ ಘೋಷಿಸಲಾಗಿದೆ.
ರಾಜ್ಯದ ಉಳಿದ ಬಹುತೇಕ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ನೀಡಲಾಗಿದ್ದು, ಕರಾವಳಿ ಭಾಗದಲ್ಲಿ ಮಾತ್ರ ಮಳೆಯ ತೀವ್ರತೆ ಹೆಚ್ಚಿರುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.
ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಭಾರೀ ಮಳೆ ಸಾಧ್ಯತೆ
ಹವಾಮಾನ ಇಲಾಖೆ ಮಾಹಿತಿ ಪ್ರಕಾರ, ಕರಾವಳಿ ಭಾಗದ ಒಂದೆರಡು ಸ್ಥಳಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಇದರ ಜೊತೆಗೆ ಗಂಟೆಗೆ 30ರಿಂದ 40 ಕಿ.ಮೀ. ವೇಗದಲ್ಲಿ ಬಿರುಗಾಳಿ ಬೀಸುವ ಮುನ್ಸೂಚನೆಯೂ ಇದೆ.
ಬಂಗಾಳ ಕೊಲ್ಲಿಯಲ್ಲಿ ಉಂಟಾಗಿರುವ ತೀವ್ರ ವಾಯುಭಾರ ಕುಸಿತ ಹಾಗೂ ಅರಬ್ಬಿ ಸಮುದ್ರದಲ್ಲಿನ ಹವಾಮಾನ ವೈಪರೀತ್ಯದ ಪರಿಣಾಮ ಕರಾವಳಿ ಭಾಗದಲ್ಲಿ ಮಳೆ ಮತ್ತಷ್ಟು ತೀವ್ರಗೊಳ್ಳುವ ಸಾಧ್ಯತೆ ಇದೆ. ತಗ್ಗು ಪ್ರದೇಶಗಳಲ್ಲಿ ನೀರು ನಿಲ್ಲುವ ಸಾಧ್ಯತೆ ಇರುವುದರಿಂದ ಸಾರ್ವಜನಿಕರು ಹಾಗೂ ವಾಹನ ಸವಾರರು ಎಚ್ಚರಿಕೆಯಿಂದ ಸಂಚರಿಸುವಂತೆ ಸೂಚಿಸಲಾಗಿದೆ.
ಮೀನುಗಾರರು, ಸಾರ್ವಜನಿಕರಿಗೆ ಮುನ್ನೆಚ್ಚರಿಕೆ
ಮುಂದಿನ ಕೆಲವು ದಿನಗಳು ಕರಾವಳಿ ಸಮುದ್ರ ಪ್ರದೇಶದಲ್ಲಿ ಗಾಳಿ ಹಾಗೂ ಅಲೆಗಳ ತೀವ್ರತೆ ಹೆಚ್ಚಾಗುವ ಸಾಧ್ಯತೆ ಇರುವುದರಿಂದ ಮೀನುಗಾರರು ಸಮುದ್ರಕ್ಕೆ ತೆರಳುವ ಮೊದಲು ಅಧಿಕೃತ ಹವಾಮಾನ ಮಾಹಿತಿ ಪರಿಶೀಲಿಸುವಂತೆ ಅಧಿಕಾರಿಗಳು ಸೂಚಿಸಿದ್ದಾರೆ.
ಅಗತ್ಯವಿಲ್ಲದ ಪ್ರಯಾಣವನ್ನು ಸಾಧ್ಯವಾದಷ್ಟು ತಪ್ಪಿಸುವುದು, ತಗ್ಗು ಪ್ರದೇಶಗಳಲ್ಲಿ ವಾಸಿಸುವವರು ಮುನ್ನೆಚ್ಚರಿಕೆ ವಹಿಸುವುದು ಹಾಗೂ ಸ್ಥಳೀಯ ಆಡಳಿತದಿಂದ ಹೊರಡುವ ಸೂಚನೆಗಳನ್ನು ಪಾಲಿಸುವಂತೆ ಮನವಿ ಮಾಡಲಾಗಿದೆ.
ಮತ್ತಷ್ಟು ಓದಿ :











1 thought on “ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ – ನಾಳೆಯಿಂದ ಮತ್ತೆ ಭಾರೀ ಮಳೆ ಅಬ್ಬರ!”