ಕಡಬ, ಜು. 6: ಚಿನ್ನದ ಆಭರಣಗಳ ತೂಕವನ್ನು ಕೃತಕವಾಗಿ ಹೆಚ್ಚಿಸಿ ಬ್ಯಾಂಕ್ನಲ್ಲಿ ಅಡವಿಟ್ಟು ಹಣ ಪಡೆದು ವಂಚನೆ ಮಾಡಲು ಸಂಚು ರೂಪಿಸಿದ್ದ ಆರೋಪದ ಮೇಲೆ ಇಬ್ಬರನ್ನು ಕಡಬ ಠಾಣೆ ಪೊಲೀಸರು ಬಂಧಿಸಿದ್ದಾರೆ.
ಬಂಧಿತರನ್ನು ಉಪ್ಪಿನಂಗಡಿ ನಿವಾಸಿ ಮಹಮ್ಮದ್ ಫಾಯಿಝ್ (20) ಹಾಗೂ ಬಂಟ್ವಾಳ ಕಸಬಾ ನಿವಾಸಿ ಮೊಹಮ್ಮದ್ ಮುರ್ಷೀದ್ (45) ಎಂದು ಗುರುತಿಸಲಾಗಿದೆ.
ಪೊಲೀಸರ ಮಾಹಿತಿ ಪ್ರಕಾರ, ಜುಲೈ 3ರಂದು ಸಂಜೆ ಕಡಬ ಪೇಟೆಯಲ್ಲಿ ಇಬ್ಬರು ವ್ಯಕ್ತಿಗಳು ಅನುಮಾನಾಸ್ಪದವಾಗಿ ಓಡಾಡುತ್ತಿರುವ ಬಗ್ಗೆ ಮಾಹಿತಿ ಲಭ್ಯವಾಗಿತ್ತು. ತಕ್ಷಣ ಸ್ಥಳಕ್ಕೆ ತೆರಳಿದ ಪೊಲೀಸರು ಅವರನ್ನು ತಡೆದು ವಿಚಾರಣೆ ನಡೆಸಿದರು. ಈ ವೇಳೆ ಅವರು ಬ್ಯಾಂಕ್ನಲ್ಲಿ ಸುಮಾರು 120 ಗ್ರಾಂ ಚಿನ್ನವನ್ನು ಅಡವಿಡಲು ಬಂದಿರುವುದಾಗಿ ತಿಳಿಸಿದ್ದಾರೆ.
ಆದರೆ ಅವರ ನಡೆ-ನುಡಿ ಅನುಮಾನಾಸ್ಪದವಾಗಿದ್ದ ಹಿನ್ನೆಲೆಯಲ್ಲಿ ಪೊಲೀಸರು ಇಬ್ಬರನ್ನೂ ಹೆಚ್ಚಿನ ವಿಚಾರಣೆಗಾಗಿ ಠಾಣೆಗೆ ಕರೆತಂದರು. ಅವರ ಬಳಿಯಿದ್ದ ಚಿನ್ನದ ಆಭರಣಗಳ ಬಗ್ಗೆ ದಾಖಲೆಗಳನ್ನು ಕೇಳಿದಾಗ ಯಾವುದೇ ಸಮರ್ಪಕ ದಾಖಲೆಗಳನ್ನು ನೀಡಲು ಸಾಧ್ಯವಾಗಲಿಲ್ಲ. ಜೊತೆಗೆ ಆಭರಣಗಳ ಮೂಲದ ಕುರಿತು ತೃಪ್ತಿಕರ ಮಾಹಿತಿ ನೀಡದ ಹಿನ್ನೆಲೆಯಲ್ಲಿ ತನಿಖೆಯನ್ನು ಮತ್ತಷ್ಟು ತೀವ್ರಗೊಳಿಸಲಾಯಿತು.
ವಿಚಾರಣೆ ವೇಳೆ, ಆಭರಣಗಳ ತೂಕವನ್ನು ಕೃತಕವಾಗಿ ಹೆಚ್ಚಿಸಿ ಬ್ಯಾಂಕ್ನಲ್ಲಿ ಅಡವಿಟ್ಟು ಸಾಲ ಪಡೆದು ಬ್ಯಾಂಕ್ಗೆ ವಂಚನೆ ಮಾಡುವ ಉದ್ದೇಶದಿಂದ ಬಂದಿರುವುದಾಗಿ ಆರೋಪಿಗಳು ಒಪ್ಪಿಕೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಮತ್ತಷ್ಟು ಓದಿ
ಮಂಗಳೂರಿನಲ್ಲಿ ಕಾಮಾಲೆ ಪ್ರಕರಣಗಳ ಏರಿಕೆ; ಒಂದೇ ವಾರದಲ್ಲಿ 15 ಮಂದಿಗೆ ಸೋಂಕು ದೃಢ









