ಉಡುಪಿ : ಕೊಲ್ಲೂರು ಶ್ರೀ ಮೂಕಾಂಬಿಕೆ ದೇವಸ್ಥಾನದಲ್ಲಿ ಭಕ್ತೆಯೊಬ್ಬರ ಬ್ಯಾಗ್ನಿಂದ ₹80 ಸಾವಿರ ನಗದು ಕಳವಾಗಿದ್ದ ಪ್ರಕರಣವನ್ನು ಪೊಲೀಸರು ಕೇವಲ 24 ಗಂಟೆಗಳಲ್ಲೇ ಭೇದಿಸಿದ್ದು, ಮೂವರು ಮಹಿಳೆಯರನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಬಂಧಿತರನ್ನು ಶಿವಮೊಗ್ಗ ಜಿಲ್ಲೆಯ ಭದ್ರಾವತಿ ಮೂಲದ ನೇತ್ರಾವತಿ, ಶಾರದಾ ಹಾಗೂ ದುರ್ಗಮ್ಮ ಎಂದು ಗುರುತಿಸಲಾಗಿದೆ.
ಪೊಲೀಸರ ಮಾಹಿತಿ ಪ್ರಕಾರ, ನಿಮಿಷಾ ಎಂಬ ಭಕ್ತೆ ಶ್ರೀ ಮೂಕಾಂಬಿಕೆ ದೇವಸ್ಥಾನಕ್ಕೆ ದರ್ಶನಕ್ಕಾಗಿ ಬಂದಿದ್ದ ವೇಳೆ ಅವರ ವ್ಯಾನಿಟಿ ಬ್ಯಾಗ್ನಲ್ಲಿದ್ದ ₹80 ಸಾವಿರ ನಗದು ಕಳುವಾಗಿತ್ತು. ದೇವಸ್ಥಾನ ಆವರಣದಲ್ಲಿ ಸಾಕಷ್ಟು ಹುಡುಕಾಟ ನಡೆಸಿದರೂ ಹಣ ಪತ್ತೆಯಾಗಿರಲಿಲ್ಲ. ಬಳಿಕ ಅವರು ಕೊಲ್ಲೂರು ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು.
ಪ್ರಕರಣ ದಾಖಲಿಸಿಕೊಂಡ ಪೊಲೀಸರು ದೇವಸ್ಥಾನದ ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸುವುದರ ಜೊತೆಗೆ, ಘಟನೆ ನಡೆದ ಸಂದರ್ಭದಲ್ಲಿ ಸಾರ್ವಜನಿಕರು ತಮ್ಮ ಮೊಬೈಲ್ಗಳಲ್ಲಿ ಸೆರೆಹಿಡಿದಿದ್ದ ಛಾಯಾಚಿತ್ರಗಳನ್ನೂ ಪರಿಶೀಲಿಸಿ ತನಿಖೆ ನಡೆಸಿದರು. ಈ ಪರಿಶೀಲನೆಯಿಂದ ಕಳ್ಳತನದಲ್ಲಿ ಭಾಗಿಯಾಗಿದ್ದ ಮೂವರು ಮಹಿಳೆಯರ ಬಗ್ಗೆ ಮಹತ್ವದ ಸುಳಿವು ಲಭಿಸಿತು.
ಸುಳಿವಿನ ಆಧಾರದ ಮೇಲೆ ಕಾರ್ಯಾಚರಣೆ ನಡೆಸಿದ ಪೊಲೀಸರು ಮೂವರನ್ನೂ ಬಂಧಿಸಿದ್ದಾರೆ. ತನಿಖೆಯಲ್ಲಿ ಬಂಧಿತ ದುರ್ಗಮ್ಮ ವಿರುದ್ಧ ಈಗಾಗಲೇ ಎರಡು ಕಳ್ಳತನ ಪ್ರಕರಣಗಳು ಹಾಗೂ ಶಾರದಾ ವಿರುದ್ಧ ಮೂರು ಕಳ್ಳತನ ಪ್ರಕರಣಗಳು ದಾಖಲಾಗಿರುವುದು ಬೆಳಕಿಗೆ ಬಂದಿದೆ.
ಬಂಧಿತರಿಂದ ಹೆಚ್ಚಿನ ಮಾಹಿತಿ ಸಂಗ್ರಹಿಸುತ್ತಿರುವ ಪೊಲೀಸರು ಪ್ರಕರಣದ ಕುರಿತು ತನಿಖೆಯನ್ನು ಮುಂದುವರಿಸಿದ್ದಾರೆ.
ಮತ್ತಷ್ಟು ಓದಿ
ಬೈಕಂಪಾಡಿ ಹೆದ್ದಾರಿ ದರೋಡೆ ಪ್ರಕರಣ: ಮೂವರು ಬಂಧನ, ಉಳಿದ 13 ಆರೋಪಿಗಳಿಗಾಗಿ ತೀವ್ರ ಶೋಧ
ಶೋರೂಮ್ನಿಂದ ಹೊರಬಂದ ಕೆಲವೇ ಗಂಟೆಗಳಲ್ಲಿ ಭೀಕರ ಅಪಘಾತ! ಸುಳ್ಯದಲ್ಲಿ ನೂತನ ಕಾರು ಲಾರಿಗೆ ಡಿಕ್ಕಿ, ಮಹಿಳೆಗೆ ಗಾಯ













1 thought on “ಕೊಲ್ಲೂರು ಮೂಕಾಂಬಿಕೆ ದೇವಸ್ಥಾನದಲ್ಲಿ ಭಕ್ತೆಯ ₹80 ಸಾವಿರ ಕಳ್ಳತನ; 24 ಗಂಟೆಯಲ್ಲೇ ಮೂವರು ಮಹಿಳೆಯರ ಬಂಧನ”