ಪುತ್ತೂರು: ಪುತ್ತೂರು ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ರೋಗಿಯ ಸಂಬಂಧಿಕನೊಬ್ಬ ವೈದ್ಯರೊಂದಿಗೆ ಗಲಾಟೆ ನಡೆಸಿ, ಅವಾಚ್ಯ ಶಬ್ದಗಳಿಂದ ನಿಂದಿಸಿ ವೈದ್ಯರ ಕರ್ತವ್ಯಕ್ಕೆ ಅಡ್ಡಿಪಡಿಸಿದ ಘಟನೆ ನಡೆದಿದೆ.
ಈ ಸಂಬಂಧ ಕೊಡಿಂಬಾಳ ನಿವಾಸಿ ಶಾಂತರಾಮ ಗೌಡ ಅವರ ಪುತ್ರ ಗೋವರ್ಧನ ಗೌಡ ವಿರುದ್ಧ ಪ್ರಕರಣ ದಾಖಲಾಗಿದೆ. ಶಾಂತರಾಮ ಗೌಡ ಅವರು ಅನಾರೋಗ್ಯದ ಹಿನ್ನೆಲೆಯಲ್ಲಿ ಪುತ್ತೂರು ಸರ್ಕಾರಿ ಆಸ್ಪತ್ರೆಯಲ್ಲಿ ದಾಖಲಾಗಿದ್ದು, ಜೂನ್ 25ರಂದು ಅವರ ಆರೋಗ್ಯ ಸ್ಥಿತಿ ಗಂಭೀರವಾಗಿತ್ತು.
ರೋಗಿಯ ಆರೋಗ್ಯ ಸ್ಥಿತಿಯನ್ನು ಪರಿಶೀಲಿಸಿದ ವೈದ್ಯರು ಹೆಚ್ಚಿನ ಚಿಕಿತ್ಸೆಗಾಗಿ ಅವರನ್ನು ಮಂಗಳೂರಿನ ವೆನ್ಲಾಕ್ ಆಸ್ಪತ್ರೆಗೆ ತಕ್ಷಣವೇ ಸ್ಥಳಾಂತರಿಸುವಂತೆ ಕುಟುಂಬ ಸದಸ್ಯರಿಗೆ ಸೂಚನೆ ನೀಡಿದ್ದರು. ಆದರೆ ಈ ವೇಳೆ ಗೋವರ್ಧನ ಗೌಡ ವೈದ್ಯರೊಂದಿಗೆ ವಾಗ್ವಾದ ನಡೆಸಿ ಗಲಾಟೆ ಮಾಡಿದ್ದಾನೆ ಎಂದು ಆರೋಪಿಸಲಾಗಿದೆ.
ವೈದ್ಯರು ನೀಡಿದ ದೂರಿನ ಪ್ರಕಾರ, ಆರೋಪಿಯು ಅವಾಚ್ಯ ಶಬ್ದಗಳಿಂದ ನಿಂದಿಸುವುದರ ಜೊತೆಗೆ ಆಸ್ಪತ್ರೆಯಲ್ಲಿನ ಕರ್ತವ್ಯ ನಿರ್ವಹಣೆಗೆ ಅಡ್ಡಿಪಡಿಸಿದ್ದಾನೆ ಎನ್ನಲಾಗಿದೆ. ಈ ಕುರಿತು ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ.
ಮತ್ತಷ್ಟು ಓದಿ :
ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಹಳೆಯ ಅಯ್ಯಪ್ಪ ಮಂದಿರ ತೆರವು ಕಾರ್ಯ ಆರಂಭ; ವಿಧಿವಿಧಾನಗಳೊಂದಿಗೆ ಚಾಲನೆ















