ಪಿಎಫ್ಐ ಸಂಪರ್ಕದ ಮಾಹಿತಿ ಆಧರಿಸಿ ಮೂವರನ್ನು ಕರೆಸಿ ಪ್ರಶ್ನೆ
ಮಂಗಳೂರು : ಹಿಂದೂ ಸಂಘಟನೆಯ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣದ ತನಿಖೆಯನ್ನು ಮುಂದುವರಿಸಿರುವ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್ಐಎ) ಅಧಿಕಾರಿಗಳ ತಂಡ ಮತ್ತೊಮ್ಮೆ ಬಜಪೆಗೆ ಭೇಟಿ ನೀಡಿ ಪರಿಶೀಲನಾ ಕಾರ್ಯ ನಡೆಸಿದೆ.
ಮಂಗಳವಾರ ಎನ್ಐಎ ಡಿವೈಎಸ್ಪಿ ರಾಜೀವ್ ಸಿಂಗ್ ಹಾಗೂ ಇನ್ಸ್ಪೆಕ್ಟರ್ ಮಲ್ಲಿಕಾರ್ಜುನ್ ಸೇರಿದಂತೆ ಐವರು ಅಧಿಕಾರಿಗಳು ಬಜಪೆ ಪೊಲೀಸ್ ಠಾಣೆಗೆ ಆಗಮಿಸಿ ಪ್ರಕರಣಕ್ಕೆ ಸಂಬಂಧಿಸಿದ ಮಾಹಿತಿಗಳನ್ನು ಸಂಗ್ರಹಿಸಿದರು. ನಿಷೇಧಿತ ಪಿಎಫ್ಐ ಸಂಘಟನೆಯೊಂದಿಗೆ ಸಂಪರ್ಕ ಹೊಂದಿದ್ದರೆಂಬ ಶಂಕೆಯ ಹಿನ್ನೆಲೆ ಮೂವರನ್ನು ಠಾಣೆಗೆ ಕರೆಸಿ ವಿಚಾರಣೆ ನಡೆಸಲಾಗಿದೆ ಎಂದು ತಿಳಿದುಬಂದಿದೆ.
ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಳೆದ ಒಂದು ವರ್ಷದಿಂದ ಎನ್ಐಎ ತನಿಖೆ ನಡೆಸುತ್ತಿದೆ. ಇದರ ಭಾಗವಾಗಿ 2025ರ ಆಗಸ್ಟ್ 2ರಂದು ಮಂಗಳೂರು ಹೊರವಲಯದ ಸುರತ್ಕಲ್ ಹಾಗೂ ಬಜಪೆ ಪೊಲೀಸ್ ಠಾಣಾ ವ್ಯಾಪ್ತಿಯ 14 ಸ್ಥಳಗಳಲ್ಲಿ ದಾಳಿ ನಡೆಸಿ ತನಿಖೆಗೆ ಅಗತ್ಯವಾದ ದಾಖಲೆಗಳನ್ನು ವಶಪಡಿಸಿಕೊಂಡಿತ್ತು.
2025ರ ಮೇ 1ರಂದು ಬಜಪೆ ಸಮೀಪದ ಕಿನ್ನಿಪದವು ಪ್ರದೇಶದಲ್ಲಿ ರಾತ್ರಿ ವೇಳೆ ಸುಹಾಸ್ ಶೆಟ್ಟಿ ಹತ್ಯೆಗೀಡಾಗಿದ್ದರು. ಈ ಪ್ರಕರಣದಲ್ಲಿ ಪಿಎಫ್ಐ ಕಾರ್ಯಕರ್ತರು ಸೇರಿದಂತೆ ಒಟ್ಟು 12 ಮಂದಿಯನ್ನು ಬಂಧಿಸಲಾಗಿತ್ತು.
ಪ್ರಕರಣದಲ್ಲಿ ವಿದೇಶಗಳಿಂದ ಹಣಕಾಸು ನೆರವು ದೊರೆತಿರುವ ಸಾಧ್ಯತೆಯ ಕುರಿತು ಮಾಹಿತಿ ಲಭ್ಯವಾದ ಹಿನ್ನೆಲೆಯಲ್ಲಿ ತನಿಖೆಯನ್ನು ಎನ್ಐಎಗೆ ವಹಿಸಲಾಗಿತ್ತು. ಈ ನಿಟ್ಟಿನಲ್ಲಿ ಸಂಸ್ಥೆಯ ಅಧಿಕಾರಿಗಳು ವಿವಿಧ ಆಯಾಮಗಳಲ್ಲಿ ತನಿಖೆಯನ್ನು ಮುಂದುವರಿಸಿದ್ದಾರೆ.
ಪ್ರಕರಣದ ಸಂಪೂರ್ಣ ಸತ್ಯಾಂಶ ಹೊರತರುವ ಉದ್ದೇಶದಿಂದ ಎನ್ಐಎ ತನಿಖಾ ಪ್ರಕ್ರಿಯೆ ಮುಂದುವರಿದಿದ್ದು, ಇತ್ತೀಚಿನ ವಿಚಾರಣೆ ಕೂಡ ಅದರ ಭಾಗವಾಗಿದೆ.
ಮತ್ತಷ್ಟು ಓದಿ :
ಉಡುಪಿ : ಪಾಪನಾಶಿನಿ ಸೇತುವೆಯಿಂದ ನದಿಗೆ ಹಾರಿ ಯುವಕ ಆತ್ಮಹತ್ಯೆ; ಸಂಜೆಯ ವೇಳೆ ಮೃತದೇಹ ಪತ್ತೆ
OLXನಲ್ಲಿ ಬೈಕ್ ಮಾರಾಟದ ಆಮಿಷ : ₹5.58 ಲಕ್ಷ ಕಳೆದುಕೊಂಡ ಮಂಗಳೂರಿನ ವ್ಯಕ್ತಿ










1 thought on “ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣ : ಬಜಪೆಯಲ್ಲಿ ಎನ್ಐಎ ಅಧಿಕಾರಿಗಳಿಂದ ಮತ್ತೆ ವಿಚಾರಣೆ”