ಕನ್ಯಾನದ ಪಾದೆಕಲ್ಲಿನಲ್ಲಿ ದುರ್ಘಟನೆ; ವಾಹನ ಪರಿಶೀಲನೆ ವೇಳೆ ಅನಾಹುತ
ವಿಟ್ಲ: ದಕ್ಷಿಣ ಕನ್ನಡ ಜಿಲ್ಲೆಯ ವಿಟ್ಲ ಸಮೀಪದ ಕನ್ಯಾನ ಗ್ರಾಮದ ಪಾದೆಕಲ್ಲು ಪ್ರದೇಶದಲ್ಲಿ ಟಿಪ್ಪರ್ ಲಾರಿ ಚಾಲಕನೊಬ್ಬ ದುರಸ್ತಿ ಕಾರ್ಯ ನಡೆಸುತ್ತಿದ್ದ ವೇಳೆ ಸಂಭವಿಸಿದ ಅವಘಡದಲ್ಲಿ ಮೃತಪಟ್ಟ ಘಟನೆ ನಡೆದಿದೆ.
ಮೃತರನ್ನು ಮಹೇಶ್ ಎಂದು ಗುರುತಿಸಲಾಗಿದೆ. ಅವರು ಚಲಾಯಿಸುತ್ತಿದ್ದ ಟಿಪ್ಪರ್ ಲಾರಿಯಲ್ಲಿ ತಾಂತ್ರಿಕ ದೋಷ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ವಾಹನವನ್ನು ರಸ್ತೆ ಬದಿಯಲ್ಲಿ ನಿಲ್ಲಿಸಿ ಪರಿಶೀಲನೆಗೆ ಮುಂದಾಗಿದ್ದರು ಎನ್ನಲಾಗಿದೆ.
ಲಾರಿಯ ಕೆಳಭಾಗಕ್ಕೆ ಇಳಿದು ದೋಷ ಪತ್ತೆಹಚ್ಚುವ ಕಾರ್ಯದಲ್ಲಿ ತೊಡಗಿದ್ದ ವೇಳೆ, ಅಚಾನಕ್ ವಾಹನ ಚಲನೆಗೊಂಡಿದೆ. ಪರಿಣಾಮವಾಗಿ ಲಾರಿಯ ಚಕ್ರಗಳು ಮಹೇಶ್ ಅವರ ಮೇಲೆ ಹರಿದಿದ್ದು, ಗಂಭೀರ ಗಾಯಗಳಿಂದ ಅವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ.
ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆ ಸ್ಥಳೀಯರು ಹಾಗೂ ಸದ್ಗುರು ತುರ್ತು ಚಿಕಿತ್ಸಾ ವಾಹನದ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ರಕ್ಷಣಾ ಕಾರ್ಯಾಚರಣೆ ನಡೆಸಿದರು. ಬಳಿಕ ಲಾರಿಯ ಅಡಿಯಲ್ಲಿ ಸಿಲುಕಿದ್ದ ಮೃತದೇಹವನ್ನು ಹೊರತೆಗೆದರು.
ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ವಿಟ್ಲ ಸರ್ಕಾರಿ ಆಸ್ಪತ್ರೆಗೆ ಸಾಗಿಸಲಾಗಿದ್ದು, ಘಟನೆಯ ಕುರಿತು ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ.
ಮತ್ತಷ್ಟು ಓದಿ :
ಉಪ್ಪಿನಂಗಡಿ ಬಳಿ ಜಾನುವಾರು ಸಾಗಣೆ ಪ್ರಕರಣ: ಇಬ್ಬರ ಬಂಧನ, 16 ಜಾನುವಾರುಗಳ ರಕ್ಷಣೆ
ಶಾಲೆ ಕಾಲೇಜು ಆರಂಭ : ಗ್ರಾಮೀಣ ವಿದ್ಯಾರ್ಥಿಗಳಿಗೆ ಬಸ್ ಕೊರತೆ ತಲೆನೋವು
ರಾಷ್ಟ್ರೀಯ ಹೆದ್ದಾರಿಯಲ್ಲಿ ಕಾರು ಡಿಕ್ಕಿ: ಚಿಕಿತ್ಸೆ ಫಲಕಾರಿಯಾಗದೆ ವ್ಯಕ್ತಿ ಸಾವು









