ವಯನಾಡು: ಕೇರಳದ ವಯನಾಡು ಜಿಲ್ಲೆಯಲ್ಲಿ ಇತ್ತೀಚೆಗೆ ಸಂಭವಿಸಿದ ಭೀಕರ ಭೂಕುಸಿತ ದುರಂತದಲ್ಲಿ ಮೃತಪಟ್ಟವರ ಸಂಖ್ಯೆ ಆರುಕ್ಕೆ ಏರಿಕೆಯಾಗಿದೆ. ಗುರುವಾರ (ಜು. 9) ನಡೆದ ಶೋಧ ಮತ್ತು ರಕ್ಷಣಾ ಕಾರ್ಯಾಚರಣೆಯ ವೇಳೆ ಇನ್ನೂ ಮೂರು ಮೃತದೇಹಗಳನ್ನು ಹೊರತೆಗೆಯಲಾಗಿದ್ದು, ಅಧಿಕಾರಿಗಳು ಈ ಮಾಹಿತಿಯನ್ನು ದೃಢಪಡಿಸಿದ್ದಾರೆ.
ಎನ್ಡಿಆರ್ಎಫ್, ಅಗ್ನಿಶಾಮಕ ದಳ ಹಾಗೂ ಸ್ಥಳೀಯ ಪೊಲೀಸ್ ಸಿಬ್ಬಂದಿ ಜಂಟಿಯಾಗಿ ಕಾರ್ಯಾಚರಣೆ ಮುಂದುವರಿಸಿದ್ದು, ಕಲ್ಲು-ಮಣ್ಣಿನ ಅವಶೇಷಗಳಡಿ ಹಾಗೂ ಸಮೀಪದಲ್ಲಿ ಹರಿಯುತ್ತಿರುವ ನದಿಯಲ್ಲಿ ಶೋಧ ನಡೆಸುವ ವೇಳೆ ಮೂರು ಮೃತದೇಹಗಳು ಪತ್ತೆಯಾಗಿವೆ. ಇದರೊಂದಿಗೆ ದುರಂತದಲ್ಲಿ ಮೃತಪಟ್ಟವರ ಸಂಖ್ಯೆ ಆರುಕ್ಕೆ ತಲುಪಿದೆ.
ಮೃತರನ್ನು ಉತ್ತರ ಪ್ರದೇಶದ ಸರ್ವೇಯರ್ ಅಜಹರುದ್ದೀನ್ ಅನ್ಸಾರಿ, ಹಿಮಾಚಲ ಪ್ರದೇಶದ ಎಂಜಿನಿಯರ್ ರಾಹುಲ್ ಶರ್ಮಾ ಹಾಗೂ ಬಿಹಾರದ ಹಿಟಾಚಿ ಆಪರೇಟರ್ ಮೊಹಮ್ಮದ್ ಇಮ್ರಾನ್ ಅನ್ಸಾರಿ ಎಂದು ಗುರುತಿಸಲಾಗಿದೆ.
ಇನ್ನೂ ಇಬ್ಬರು ಕಾರ್ಮಿಕರು ನಾಪತ್ತೆಯಾಗಿದ್ದು, ಅವರನ್ನು ಪತ್ತೆಹಚ್ಚಲು ರಕ್ಷಣಾ ಸಿಬ್ಬಂದಿ ಕಾರ್ಯಾಚರಣೆಯನ್ನು ಮತ್ತಷ್ಟು ತೀವ್ರಗೊಳಿಸಿದ್ದಾರೆ. ಕಾರ್ಯಾಚರಣೆಯನ್ನು ನಾಲ್ಕು ವಲಯಗಳಾಗಿ ವಿಭಜಿಸಿ ಎನ್ಡಿಆರ್ಎಫ್, ಅಗ್ನಿಶಾಮಕ ದಳ ಮತ್ತು ಸ್ಥಳೀಯ ಪೊಲೀಸರು ನಿರಂತರ ಶೋಧ ನಡೆಸುತ್ತಿದ್ದಾರೆ.
ದುರಂತದಲ್ಲಿ ಗಾಯಗೊಂಡಿದ್ದ 10 ಕಾರ್ಮಿಕರಲ್ಲಿ ಮೂವರು ಚಿಕಿತ್ಸೆ ಬಳಿಕ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಉಳಿದವರು ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಅವರಲ್ಲಿ ಇಬ್ಬರ ಆರೋಗ್ಯ ಸ್ಥಿತಿ ಗಂಭೀರವಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ವಯನಾಡು ಮತ್ತು ಕೋ ಝಿಕ್ಕೋ ಡ್ ಜಿಲ್ಲೆಗಳನ್ನು ಸಂಪರ್ಕಿಸುವ ಆನೆಕ್ಕಂಪೊಯಿಲ್–ಮೇಪ್ಪಾಡಿ ಸುರಂಗ ಮಾರ್ಗ ಯೋಜನೆ ಪ್ರದೇಶದಲ್ಲಿ ಜುಲೈ 7ರಂದು ಈ ಭೂಕುಸಿತ ಸಂಭವಿಸಿತ್ತು. ಅಂದಿನಿಂದ ನಿರಂತರವಾಗಿ ರಕ್ಷಣಾ ಹಾಗೂ ಶೋಧ ಕಾರ್ಯಾಚರಣೆ ಮುಂದುವರಿದಿದ್ದು, ನಾಪತ್ತೆಯಾದವರಿಗಾಗಿ ಸಿಬ್ಬಂದಿ ಶ್ರಮಿಸುತ್ತಿದ್ದಾರೆ.
ಮತ್ತಷ್ಟು ಓದಿ
ಮಂಗಳೂರು ಚಾಲಿ ಮಾರುಕಟ್ಟೆಯಲ್ಲಿ ಹೊಸ ಅಡಿಕೆಗೆ ₹5 ಹೆಚ್ಚಳ; ಬೆಲೆ ಮತ್ತಷ್ಟು ಏರಿಕೆಯಾಗುವ ಸಾಧ್ಯತೆ













1 thought on “ವಯನಾಡು ಭೂಕುಸಿತ ದುರಂತ : ಮತ್ತೆ ಮೂರು ಮೃತದೇಹಗಳು ಪತ್ತೆ; ಸಾವಿನ ಸಂಖ್ಯೆ 6ಕ್ಕೆ ಏರಿಕೆ”