ಮಂಗಳೂರು: ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಾಗಿ ಬಳಿಕ ಮೃತಪಟ್ಟ ಮಹಿಳೆಯ ಕುತ್ತಿಗೆಯಲ್ಲಿದ್ದ ಸುಮಾರು 32 ಗ್ರಾಂ ತೂಕದ ಚಿನ್ನದ ಕರಿಮಣಿ ಸರ ನಾಪತ್ತೆಯಾಗಿದೆ ಎಂಬ ಆರೋಪ ಕೇಳಿಬಂದಿದ್ದು, ಈ ಸಂಬಂಧ ಪತಿ ಪಾಂಡೇಶ್ವರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.
ಶಕ್ತಿನಗರ ನಿವಾಸಿ ಸುಂದರ ಪೂಜಾರಿ ಅವರ ಪತ್ನಿ ಜಾನಕಿ (53) ಅವರಿಗೆ ಎದೆನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಮೊದಲಿಗೆ ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅಲ್ಲಿ ಹೃದ್ರೋಗ ತಜ್ಞರು ಲಭ್ಯವಿರದ ಕಾರಣ ಹೆಚ್ಚಿನ ಚಿಕಿತ್ಸೆಗೆ ಅವರನ್ನು ವೆನ್ಲಾಕ್ ಆಸ್ಪತ್ರೆಗೆ ಸ್ಥಳಾಂತರಿಸಲಾಯಿತು.
ಚಿಕಿತ್ಸೆ ಫಲಕಾರಿಯಾಗದೆ ಮಹಿಳೆ ಸಾವು
ವೆನ್ಲಾಕ್ ಆಸ್ಪತ್ರೆಯ ತುರ್ತು ಚಿಕಿತ್ಸಾ ವಿಭಾಗದಲ್ಲಿ ವೈದ್ಯರು ಪರೀಕ್ಷೆ ನಡೆಸಿದ ಬಳಿಕ ಜಾನಕಿ ಅವರು ಮೃತಪಟ್ಟಿರುವುದಾಗಿ ಘೋಷಿಸಿದ್ದಾರೆ. ಕುಟುಂಬದವರು ಮೃತದೇಹವನ್ನು ಪರಿಶೀಲಿಸುವ ವೇಳೆ ಅವರ ಕುತ್ತಿಗೆಯಲ್ಲಿದ್ದ ಚಿನ್ನದ ಕರಿಮಣಿ ಸರ ಕಾಣಿಸದಿರುವುದು ಗಮನಕ್ಕೆ ಬಂದಿದೆ.
ಕರಿಮಣಿ ಸರ ಪತ್ತೆಗೆ ಪೊಲೀಸರಿಗೆ ಮನವಿ
ದೂರಿನ ಪ್ರಕಾರ, ಆಸ್ಪತ್ರೆಗೆ ದಾಖಲಿಸುವ ಸಮಯದಲ್ಲಿ ಜಾನಕಿ ಅವರ ಕುತ್ತಿಗೆಯಲ್ಲಿ ಸುಮಾರು 32 ಗ್ರಾಂ ತೂಕದ ಚಿನ್ನದ ಕರಿಮಣಿ ಸರ ಇತ್ತು. ಆದರೆ ಬಳಿಕ ಅದು ನಾಪತ್ತೆಯಾಗಿರುವುದರಿಂದ, ಅದನ್ನು ಯಾರು ತೆಗೆದಿದ್ದಾರೆ ಎಂಬುದನ್ನು ಪತ್ತೆಹಚ್ಚಿ ಸೂಕ್ತ ಕಾನೂನು ಕ್ರಮ ಕೈಗೊಳ್ಳುವಂತೆ ಪಾಂಡೇಶ್ವರ ಪೊಲೀಸರಿಗೆ ಮನವಿ ಮಾಡಲಾಗಿದೆ.
ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ದೂರು ಪರಿಶೀಲಿಸಿ ಮುಂದಿನ ಕ್ರಮ ಕೈಗೊಂಡಿದ್ದಾರೆ.
ಮತ್ತಷ್ಟು ಓದಿ :










